15 June 2026 |

ತುಳು ಭಾಷೆಯ ಉತ್ತೇಜನಕ್ಕೆ ನಿಗಮ ರಚನೆ, ಕಾರ್ಕಳದಲ್ಲಿ ತುಳು ಭವನಕ್ಕೆ ಅನುದಾನ ಕೋರಿ ಮನವಿ

  • 14 Jun 2026 08:07:26 PM

ಉಡುಪಿ/ಬೆಂಗಳೂರು: ರಾಜ್ಯದಲ್ಲಿ ತುಳು ಭಾಷೆ ಮತ್ತು ಸಂಸ್ಕೃತಿಯ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ಜಾರಿಗೆ ತರಬೇಕೆಂದು ಕಾಂಗ್ರೆಸ್ ಮುಖಂಡ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ. ತುಳು ಭಾಷೆಯ ಬೆಳವಣಿಗೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ತುಳು ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವಂತೆ ಹಾಗೂ ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅಗತ್ಯ ಹಣಕಾಸು ನೆರವು ಒದಗಿಸುವಂತೆ ಅವರು ಕೋರಿದ್ದಾರೆ.

 

ತುಳು ಭಾಷೆ, ಸಾಹಿತ್ಯ, ಕಲೆ ಹಾಗೂ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆಗೆ ಸರ್ಕಾರದ ಮಟ್ಟದಲ್ಲಿ ಶಾಶ್ವತ ವ್ಯವಸ್ಥೆ ರೂಪಿಸುವ ಅಗತ್ಯವಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ತುಳು ಭಾಷೆಗೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳನ್ನು ಸಮನ್ವಯಗೊಳಿಸಲು ಪ್ರತ್ಯೇಕ ಅಭಿವೃದ್ಧಿ ನಿಗಮ ಸಹಕಾರಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

 

ಈ ಕುರಿತು ಪ್ರತಿಕ್ರಿಯಿಸಿದ ಮುನಿಯಾಲ್ ಉದಯ್ ಕುಮಾರ್ ಶೆಟ್ಟಿ, ತುಳು ಭಾಷೆ ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಸಮೃದ್ಧ ದ್ರಾವಿಡ ಭಾಷೆಯಾಗಿದ್ದು, ಕರಾವಳಿ ಭಾಗದ ಜನರ ಬದುಕಿನೊಂದಿಗೆ ಬೆಸೆದುಕೊಂಡಿದೆ ಎಂದು ಹೇಳಿದ್ದಾರೆ. ತುಳುನಾಡಿನ ಸಂಸ್ಕೃತಿ, ಆಚರಣೆಗಳು ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸಲು ಭಾಷೆಯ ಸಂರಕ್ಷಣೆ ಅತ್ಯಗತ್ಯ ಎಂದರು.

 

ಜಾಗತೀಕರಣದ ಪ್ರಭಾವದಿಂದ ಸ್ಥಳೀಯ ಭಾಷೆಗಳ ಬಳಕೆ ಕ್ರಮೇಣ ಕಡಿಮೆಯಾಗುತ್ತಿರುವ ಇಂದಿನ ಪರಿಸ್ಥಿತಿಯಲ್ಲಿ, ತುಳು ಭಾಷೆಯ ಉಳಿವು ಮತ್ತು ವಿಸ್ತರಣೆಗೆ ಸರ್ಕಾರ ವಿಶೇಷ ಗಮನ ಹರಿಸಬೇಕಾಗಿದೆ ಎಂದು ಅವರು ಒತ್ತಿಹೇಳಿದ್ದಾರೆ.