ಮಂಗಳೂರು: ನಗರದ ಉಳ್ಳಾಲ ತಾಲೂಕಿನ ಸೋಮೇಶ್ವರ ಪ್ರದೇಶದಲ್ಲಿ ಪ್ರಥಮ ವರ್ಷದ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ 16 ವರ್ಷದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.
ಮೃತಳನ್ನು ಸಮನ್ವಿ ಎಂದು ಗುರುತಿಸಲಾಗಿದೆ. ಆಕೆ ಸ್ಥಳೀಯ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿದ್ದು, ಸೋಮೇಶ್ವರ ನಿವಾಸಿ ಶಾಂತಿ ಅವರ ಪುತ್ರಿಯಾಗಿದ್ದಳು. ಕುಟುಂಬದ ಸದಸ್ಯರ ಮಾಹಿತಿಯಂತೆ, ಘಟನೆ ಸಂಭವಿಸಿದ ವೇಳೆ ತಾಯಿt ಹಾಗೂ ಅಕ್ಕ ಮನೆಯಲ್ಲಿ ಇದ್ದರು. ಸಮನ್ವಿ ಸ್ನಾನಕ್ಕೆ ಹೋಗುವುದಾಗಿ ಹೇಳಿ ತನ್ನ ಕೋಣೆಗೆ ತೆರಳಿದ್ದಳು.
ಬಹಳ ಸಮಯ ಕಳೆದರೂ ಹೊರಗೆ ಬಾರದ ಹಿನ್ನೆಲೆಯಲ್ಲಿ ಅನುಮಾನಗೊಂಡ ಕುಟುಂಬಸ್ಥರು ಕೋಣೆಯ ಬಾಗಿಲು ತೆರೆಯಲು ಪ್ರಯತ್ನಿಸಿದ್ದಾರೆ. ಪ್ರತಿಕ್ರಿಯೆ ಸಿಗದ ಕಾರಣ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ, ಸಮನ್ವಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂದು ತಿಳಿದುಬಂದಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಳ್ಳಾಲ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಅಸ್ವಾಭಾವಿಕ ಸಾವು (ಯುಡಿಆರ್) ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲದ ಕಾರಣ, ಆತ್ಮಹತ್ಯೆಗೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.





