ಮಂಗಳೂರು: ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಈ ವರ್ಷ ಐತಿಹಾಸಿಕ ಹಾಗೂ ಭೂಕೈಲಾಸ ಎಂದು ಪ್ರಸಿದ್ಧಿ ಪಡೆದಿರುವ ಶ್ರೀ ಕಾರಿಂಜೇಶ್ವರ ಕ್ಷೇತ್ರದಲ್ಲಿ ‘ಯೋಗ ವಿದ್ ಯೋಧ’ ಎಂಬ ವಿಶೇಷ ಯೋಗಾಭ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಜಿಲ್ಲೆಯ ಪ್ರಮುಖ ಧಾರ್ಮಿಕ ತಾಣಗಳಲ್ಲಿ ಒಂದಾದ ಕಾರಿಂಜೇಶ್ವರ ದೇವಸ್ಥಾನವು ಕೊಡ್ಯಾಮಲೆ ಬೆಟ್ಟಗಳ ಶ್ರೇಣಿಯ ಮಧ್ಯೆ ಪ್ರಕೃತಿ ಸೌಂದರ್ಯದಿಂದ ಕಂಗೊಳಿಸುತ್ತಿದೆ. ಇದೇ ಕ್ಷೇತ್ರದ ಆವರಣದಲ್ಲಿ ಜೂನ್ 21ರಂದು ಮಧ್ಯಾಹ್ನ 3 ಗಂಟೆಗೆ ‘ಯೋಗ ವಿದ್ ಯೋಧ’ ಕಾರ್ಯಕ್ರಮದ ಮೂರನೇ ಆವೃತ್ತಿ ನಡೆಯಲಿದ್ದು, ವಿದ್ಯಾರ್ಥಿಗಳು, ನಿವೃತ್ತ ಯೋಧರು, ಯೋಗಾಸಕ್ತರು, ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸುವಂತೆ ಅವರು ಕರೆ ನೀಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಪ್ರೇರಣೆಯಿಂದ ಆರಂಭಗೊಂಡ ವಿಶ್ವ ಯೋಗ ದಿನಾಚರಣೆ ಇಂದು 180ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಆಚರಿಸಲ್ಪಡುತ್ತಿದ್ದು, ಜಾಗತಿಕ ಮಟ್ಟದಲ್ಲಿ ಮಹತ್ವ ಪಡೆದುಕೊಂಡಿದೆ. ಈ ವರ್ಷದ ವಿಶ್ವ ಯೋಗ ದಿನದ ಘೋಷವಾಕ್ಯ “ಆರೋಗ್ಯಕರ ವಯಸ್ಸಿಗಾಗಿ ಯೋಗ” (Yoga for Healthy Ageing) ಆಗಿದೆ.





