ಉಪ್ಪಿನಂಗಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪ ಹೈಟೆನ್ಷನ್ ವಿದ್ಯುತ್ ಕಂಬಗಳು ಅಪಾಯಕಾರಿಯಾಗಿ ವಾಲಿ ನಿಂತಿರುವುದು ವಾಹನ ಸವಾರರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುವ ಈ ಹೆದ್ದಾರಿಯಲ್ಲಿ ಕಂಬವು ಇನ್ನಷ್ಟು ವಾಲಿದರೆ ಅಥವಾ ಕುಸಿದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಮಳೆ ಹಾಗೂ ಗಾಳಿಯ ಸಂದರ್ಭ ಅಪಾಯ ಮತ್ತಷ್ಟು ಹೆಚ್ಚುವ ಸಾಧ್ಯತೆ ಇರುವುದರಿಂದ ಸಂಬಂಧಿಸಿದ ಇಲಾಖೆಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಯಾವುದೇ ಅನಾಹುತ ಸಂಭವಿಸುವುದಕ್ಕೂ ಮುನ್ನ ಎಚ್ಚೆತ್ತುಕೊಂಡು ವಿದ್ಯುತ್ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತುರ್ತು ಕ್ರಮ ಕೈಗೊಂಡು ಸಾರ್ವಜನಿಕರ ಸುರಕ್ಷತೆಯನ್ನು ಖಚಿತಪಡಿಸಬೇಕೆಂಬ ಒತ್ತಾಯ ಕೇಳಿಬಂದಿದೆ.





