ಉಡುಪಿ: ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ಬಾಲಕ ಮೃತಪಟ್ಟ ಘಟನೆ ಉಡುಪಿ ನಗರದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಮೃತ ಬಾಲಕನನ್ನು ಬೆಳ್ಳಂಪಳ್ಳಿ ಕುಕ್ಕಿಕಟ್ಟೆಯ ಕೃಷ್ಣ ನಾಯಕ್ ಅವರ ಪುತ್ರ ಆದಿತ್ಯ ನಾಯಕ್ (15) ಎಂದು ಗುರುತಿಸಲಾಗಿದೆ. ದೇವಸ್ಥಾನದಲ್ಲಿ ಭಜನೆ ಕಾರ್ಯಕ್ರಮ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಆದಿತ್ಯ ತನ್ನ ಸಂಬಂಧಿಕರೊಂದಿಗೆ ದೇವಸ್ಥಾನಕ್ಕೆ ಬಂದಿದ್ದ ಎಂದು ತಿಳಿದುಬಂದಿದೆ.
ಉಡುಪಿ ನಗರದ ಶ್ರೀ ಲಕ್ಷ್ಮಿವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಈ ಘಟನೆ ಸಂಭವಿಸಿದೆ.
ಸ್ಥಳೀಯರ ಮನವಿಗೆ ಸ್ಪಂದಿಸಿದ ಈಜು ತಜ್ಞ ಈಶ್ವರ್ ಮಲ್ಪೆ ಅವರು ಶೋಧ ಕಾರ್ಯ ನಡೆಸಿದರು. ಸುಮಾರು ಒಂದು ಗಂಟೆ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ ಬಾಲಕನ ಮೃತದೇಹವನ್ನು ಕೆರೆಯಿಂದ ಮೇಲಕ್ಕೆತ್ತಲಾಯಿತು.
ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ.





