ಮೂಡುಬಿದಿರೆ: ಕಲಬೆರಕೆ ಹಾಗೂ ಆಹಾರ ಪದಾರ್ಥಗಳಲ್ಲಿ ರಾಸಾಯನಿಕಗಳ ಬಳಕೆಯ ಆರೋಪಗಳ ಹಿನ್ನೆಲೆಯಲ್ಲಿ ಮೂಡುಬಿದಿರೆಯ ವಾರದ ಸಂತೆಯಲ್ಲಿ ಆರೋಗ್ಯ ಇಲಾಖೆ, ಪುರಸಭೆ ಮತ್ತು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ದಿಢೀರ್ ಕಾರ್ಯಾಚರಣೆ ನಡೆಸಿದರು.
ಸಂತೆ ಪ್ರದೇಶದಲ್ಲಿರುವ ತರಕಾರಿ, ಹಣ್ಣು-ಹಂಪಲು ಮಾರಾಟ ಮಳಿಗೆಗಳು ಸೇರಿದಂತೆ ಫಾಸ್ಟ್ಫುಡ್ ಕೇಂದ್ರಗಳಿಗೆ ಭೇಟಿ ನೀಡಿದ ಅಧಿಕಾರಿಗಳು ಆಹಾರ ಪದಾರ್ಥಗಳ ಗುಣಮಟ್ಟ, ಸ್ವಚ್ಛತೆ ಹಾಗೂ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿದರು. ಪರಿಶೀಲನೆಯ ವೇಳೆ ಕೆಲವು ಆಹಾರ ವಸ್ತುಗಳ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸುವ ಕ್ರಮ ಕೈಗೊಳ್ಳಲಾಯಿತು.
ಕಾರ್ಯಾಚರಣೆಯಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿ ಡಾ. ಪ್ರವೀಣ್, ಪುರಸಭೆ ಆರೋಗ್ಯ ನಿರೀಕ್ಷಕಿ ಶಶಿರೇಖಾ, ಆರೋಗ್ಯ ನಿರೀಕ್ಷಕ ಖಾದರ್ ಸಾಬ್ ನದಾಫ್, ಆಹಾರ ಸುರಕ್ಷತಾ ಅಧಿಕಾರಿ ಗಿರೀಶ್, ಆರೋಗ್ಯ ನಿರೀಕ್ಷಣಾ ಅಧಿಕಾರಿ ನಟರಾಜ್ ಹಾಗೂ ಪುರಸಭೆಯ ಕಮ್ಯುನಿಟಿ ಮೊಬಿಲೈಸರ್ ಅಮಿತಾ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿದ್ದರು.





