09 September 2026 |

ಕರ್ನಾಟಕದಲ್ಲಿ ಮಳೆ ಕೊರತೆ: 30 ಜಿಲ್ಲೆಗಳಲ್ಲಿ ಬರದ ಆತಂಕ, ತಾಪಮಾನ ಏರಿಕೆ ಸಾಧ್ಯತೆ

  • 09 Sep 2026 02:36:04 PM

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ನಿರೀಕ್ಷಿತ ಮಟ್ಟದಲ್ಲಿ ಆಗದಿರುವುದು ಆತಂಕಕ್ಕೆ ಕಾರಣವಾಗಿದೆ. ರಾಜ್ಯದ ಒಟ್ಟು 31 ಜಿಲ್ಲೆಗಳ ಪೈಕಿ 30 ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆ ದಾಖಲಾಗಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ. ಕೆಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಶೇ.50ಕ್ಕಿಂತಲೂ ಹೆಚ್ಚಾಗಿದೆ.

 

ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬಳ್ಳಾರಿ ಜಿಲ್ಲೆಗಳು ಹೆಚ್ಚು ಮಳೆ ಕೊರತೆ ಎದುರಿಸುತ್ತಿರುವ ಜಿಲ್ಲೆಗಳ ಪಟ್ಟಿಯಲ್ಲಿವೆ. ಬೆಂಗಳೂರು ನಗರದಲ್ಲಿಯೂ ಜೂನ್ 1ರಿಂದ ಸೆಪ್ಟೆಂಬರ್ 8ರವರೆಗೆ ಸಾಮಾನ್ಯ ಪ್ರಮಾಣಕ್ಕಿಂತ ಸುಮಾರು ಶೇ.44ರಷ್ಟು ಮಳೆ ಕಡಿಮೆಯಾಗಿದೆ.

 

ಮಳೆ ಕೊರತೆಯ ಪರಿಣಾಮ ಕೃಷಿ ಚಟುವಟಿಕೆಗಳ ಮೇಲೂ ಗಂಭೀರ ಪರಿಣಾಮ ಬೀರುವ ಆತಂಕ ಎದುರಾಗಿದೆ. ಕಳೆದ ಮೂರು ವಾರಗಳಿಂದ ರಾಜ್ಯದ 122 ತಾಲೂಕುಗಳಲ್ಲಿ ಮಳೆಯಾಗಿಲ್ಲ ಎಂಬ ವರದಿಯಿದ್ದು, ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಉತ್ಪಾದನೆಯಲ್ಲಿ ಭಾರೀ ಇಳಿಕೆಯಾಗುವ ಸಾಧ್ಯತೆಯ ಬಗ್ಗೆ ಎಚ್ಚರಿಕೆ ವ್ಯಕ್ತವಾಗಿದೆ.

 

ಇದರ ನಡುವೆ ರಾಜ್ಯದ ಹಲವು ಭಾಗಗಳಲ್ಲಿ ಗರಿಷ್ಠ ತಾಪಮಾನವೂ ಏರಿಕೆಯಾಗುತ್ತಿದೆ. ಕೆಲವು ಪ್ರದೇಶಗಳಲ್ಲಿ ಮುಂದಿನ ವಾರ 37 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇತ್ತೀಚೆಗೆ ತಾಪಮಾನ 4ರಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಾಗಿದೆ ಎಂದು ವರದಿಯಾಗಿದೆ.

 

ಆದರೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳು ಮತ್ತು ಉತ್ತರ ಕನ್ನಡದ ಕೆಲವು ಭಾಗಗಳಲ್ಲಿ ಸೆಪ್ಟೆಂಬರ್ 9ರಿಂದ 13ರವರೆಗೆ ಹಗುರದಿಂದ ಸಾಧಾರಣ ಮಳೆಯ ಸಾಧ್ಯತೆಯನ್ನು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

 

ಮಳೆ ಕೊರತೆ ಮುಂದುವರಿದರೆ ಕುಡಿಯುವ ನೀರು, ಕೃಷಿ ಹಾಗೂ ಜಲಾಶಯಗಳ ಒಳಹರಿವಿನ ಮೇಲೆ ಮತ್ತಷ್ಟು ಒತ್ತಡ ಉಂಟಾಗುವ ಸಾಧ್ಯತೆಯಿದ್ದು, ಪರಿಸ್ಥಿತಿಯನ್ನು ಸರ್ಕಾರ ಮತ್ತು ಹವಾಮಾನ ಇಲಾಖೆ ಗಮನಿಸುತ್ತಿವೆ.