ಮಂಗಳೂರು: ಇತ್ತೀಚೆಗೆ ಮುಸ್ಲಿಂ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ನಟ ಹಾಗೂ ಕಲಾವಿದ ಅರವಿಂದ್ ಬೋಳಾರ್ ಅವರು ವಿಡಿಯೊ ಮೂಲಕ ಕ್ಷಮೆಯಾಚಿಸಿದ್ದಾರೆ.
ವಿಡಿಯೊದಲ್ಲಿ ಮಾತನಾಡಿರುವ ಅವರು, “ಎಲ್ಲರಿಗೂ ಸೊಲ್ಮೆಲು (ನಮಸ್ಕಾರ), ಸರ್ವಧರ್ಮದ ಕಲಾವಿದರು ನನ್ನನ್ನು ಇಷ್ಟು ಎತ್ತರಕ್ಕೆ ಕೊಂಡೊಯ್ದಿದ್ದಾರೆ. ಆದರೆ ಮೊನ್ನೆ ನಡೆದ ಕಾರ್ಯಕ್ರಮವೊಂದರಲ್ಲಿ ನಾನು ಆಡಿದ ಮಾತು ತಮ್ಮವರಿಗೇ ನೋವುಂಟು ಮಾಡಿದೆ ಎಂಬುದು ನನಗೆ ತಿಳಿದುಬಂದಿದೆ” ಎಂದು ಹೇಳಿದ್ದಾರೆ.
“ಹಿಂದೂ ಧರ್ಮವೆಂದರೆ ನನ್ನ ತಾಯಿ ಇದ್ದಂತೆ. ಯಾವುದೇ ಉದ್ದೇಶ ಇಟ್ಟುಕೊಂಡು ನಾನು ಆ ಮಾತುಗಳನ್ನು ಆಡಿಲ್ಲ. ನನ್ನ ಮಾತಿನಿಂದ ಯಾರಿಗಾದರೂ ಬೇಸರವಾಗಿದ್ದರೆ ದಯವಿಟ್ಟು ನನ್ನನ್ನು ಕ್ಷಮಿಸಬೇಕು” ಎಂದು ಅವರು ಮನವಿ ಮಾಡಿದ್ದಾರೆ.
ಕೆಲ ದಿನಗಳ ಹಿಂದೆ ಮುಸ್ಲಿಂ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಅರವಿಂದ್ ಬೋಳಾರ್ ಅವರು ಮುಸ್ಲಿಂ ಧರ್ಮ ಹಾಗೂ ಸಮುದಾಯದ ಕುರಿತು ಪ್ರಶಂಸೆಯ ಮಾತುಗಳನ್ನು ಆಡಿದ್ದರು ಎನ್ನಲಾಗಿದೆ. ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದ್ದು, ಕೆಲ ಹಿಂದೂ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿತ್ತು.
ಇದೀಗ ಈ ಹಿನ್ನೆಲೆಯಲ್ಲಿ ಅರವಿಂದ್ ಬೋಳಾರ್ ಅವರು ವಿಡಿಯೊ ಬಿಡುಗಡೆ ಮಾಡಿ ತಮ್ಮ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಕೋರುವುದಾಗಿ ತಿಳಿಸಿದ್ದಾರೆ.





